ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನೆ ನಡೆಸಿದ ಸಚಿವ ಡಾ.ಎಂ.ಬಿ.ಪಾಟೀಲ

ವಿಜಯಪುರ:ಜೂ.24: ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಜರುಗಿದ 1ನೇ ತ್ರೈಮಾಸಿಕ ಕೆಡಿಪಿ ಪ್ರಗತಿ ಪರಿಶೀಲನಾ ಸಭೆಯಲ್ಲಿ ಬೃಹತ್ ಹಾಗೂ ಮಧ್ಯಮ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ದಿ ಖಾತೆ ಸಚಿವರಾದ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಬಿ.ಪಾಟೀಲ ಅವರು, ಕುಡಿಯುವ ನೀರು, ಶಿಕ್ಷಣ, ಆರೋಗ್ಯ, ನರೇಗಾ ಯೋಜನೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನೆ ನಡೆಸಿದರು.
ಅಧಿಕಾರಿಗಳು ಜನರ ನಂಬಿಕೆ, ಅಪೇಕ್ಷೆಗನುಗುಣವಾಗಿ ಜವಾಬ್ದಾರಿಯುತವಾಗಿ ಕಾರ್ಯನಿರ್ವಹಿಸುವ ಮೂಲಕ ಸರ್ಕಾರ ಜಾರಿಗೊಳಿಸಿರುವ 5 ಯೋಜನೆಗಳ ಲಾಭ ಪ್ರತಿಯೊಬ್ಬ ಅರ್ಹ ಫಲಾನುಭವಿಗಳಿಗೆ ದೊರೆಯುವಂತೆ ನೋಡಿಕೊಳ್ಳಬೇಕು. ಯಾವುದೇ ಅರ್ಹ ಫಲಾನುಭವಿಗಳು ಯೋಜನೆಯಿಂದ ವಂಚಿತವಾಗದಂತೆ ನೋಡಿಕೊಂಡು ಪ್ರತಿಯೊಬ್ಬ ಅರ್ಹ ಫಲಾನುಭವಿಗಳಿಗೆ ಸರ್ಕಾರದ ಲಾಭ ದೊರಕಿಸುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸಬೇಕೆಂದು ಸೂಚಿಸಿದ ಅವರು, ಈ ಯೋಜನೆಯಡಿ ಲಾಭ ದೊರಕಿಸಲು ಯಾವುದೇ ಅವ್ಯವಹಾರ ಪಕ್ಷಪಾತ ಮಾಡುವುದು, ನಿರ್ಲಕ್ಷ್ಯ ವಹಿಸಿದ್ದಲ್ಲಿ ತಪ್ಪಿತಸ್ಥ ಅಧಿಕಾರಿಗಳ ಮೇಲೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಎಚ್ಚರಿಸಿದರು.
ಕುಡಿಯುವ ನೀರಿನ ಕೊರತೆಯಾಗದಂತೆ ನೋಡಿಕೊಂಡು ಮಳೆಯಾಗದಿದಲ್ಲಿ ಪರ್ಯಾಯ ವ್ಯವಸ್ಥೆ ಸಿದ್ಧವಾಗಿಟ್ಟುಕೊಳ್ಳಬೇಕು. ರೈತರಿಗೆ ಸಮರ್ಪಕವಾಗಿ ಬಿತ್ತನೆ ಬೀಜ, ರಸಗೊಬ್ಬರ ಪೂರೈಕೆಯಾಗಬೇಕು. ಮಳೆಯಾಗುವ ಆಶಾಭಾವನೆ ಇದ್ದು, ಮಳೆಯಾಗದೇ ಇದ್ದರೆ ಹುರಳಿ, ಕಡಲೆ, ಜೋಳ ಸೇರಿದಂತೆ ಪರ್ಯಾಯವಾಗಿ ಬಿತ್ತನೆ ಬೀಜ ದಾಸ್ತಾನಿಟ್ಟುಕೊಳ್ಳಬೇಕು. ಕೃಷಿ ಇಲಾಖೆಯಿಂದ ಬಿತ್ತನೆ ಬೀಜ, ರಸಗೊಬ್ಬರ ಕೊರತೆಯಾಗದಂತೆ ಹಾಗೂ ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಬೇಕು. ಜಿಲ್ಲೆಯ ಶಿಕ್ಷಕರ ಕೊರತೆ ಕೌನ್ಸಿಲಿಂಗ್ ಮೂಲಕ ನಿವಾರಿಸಿಕೊಂಡು ಉತ್ತಮ ಬೋಧನಾ ವ್ಯವಸ್ಥೆಗೆ ಕ್ರಮ ಕೈಗೊಳ್ಳಬೇಕು. ನೀರಾವರಿ ಯೋಜನೆಗಳಿಗೆ ವಿದ್ಯುತ್ ಕೊರತೆಯಾಗದಂತೆ ನೀರಾವರಿ-ಹೆಸ್ಕಾಂ ಇಲಾಖೆ ಅಧಿಕಾರಿಗಳು ಸಮನ್ವಯತೆಯಿಂದ ಕಾರ್ಯನಿರ್ವಹಿಸಬೇಕು. ಜಿಲ್ಲೆಯಲ್ಲಿ ಆರೋಗ್ಯ ವ್ಯವಸ್ಥೆ ಸುಧಾರಣೆ ಕ್ರಮ ಕೈಗೊಂಡು ಜನರಿಗೆ ಉತ್ತಮ ವೈದ್ಯಕೀಯ ಸೇವೆ ಒದಗಿಸಬೇಕು ಎಂದು ಸೂಚಿಸಲಾಯಿತು.
ಶಿಕ್ಷಣ ಇಲಾಖೆ : ಜಿಲ್ಲೆಯಲ್ಲಿ 1115 ಅತಿಥಿ ಶಿಕ್ಷಕರು ಕಾರ್ಯನಿರ್ವಹಿಸುತ್ತಿದ್ದಾರೆ. ಅದರಲ್ಲಿ ಮುಖ್ಯವಾಗಿ ವಿಜ್ಞಾನ ಇಂಗ್ಲೀಷ್ ಮತ್ತು ಗಣಿತ ವಿಷಯದ ಶಿಕ್ಷಕರನ್ನು ಪರಿಗಣನೆಗೆ ತೆಗೆದುಕೊಳ್ಳಬೇಕು. ಶಿಕ್ಷಣದ ಗುಣಮಟ್ಟದ ಹೆಚ್ಚಿಸಲು ಕ್ರಮ ಕೈಗೊಳ್ಳಬೇಕು. ಹಾಜರಾತಿ ಕಡಿಮೆಯಾಗುವ ಮಕ್ಕಳ ಕಾರಣವನ್ನು ಪ್ರತಿ ತಿಂಗಳು ಪರಿಶೀಲನೆ ನಡೆಸಬೇಕು, ಜಿಲ್ಲೆಯಲ್ಲಿ ಎಲ್ಲ ಶಾಲೆಗಳಲ್ಲಿ ಕಡ್ಡಾಯವಾಗಿ ಶೌಚಾಲಯಗಳು ಇರುವಂತೆ ನೋಡಿಕೊಳ್ಳಬೇಕು. ಶೌಚಾಲಯ ನಿರ್ಮಾಣಕ್ಕೆ ಪ್ರಥಮಾದ್ಯತೆ ನೀಡಬೇಕು. 6 ತಿಂಗಳು ಒಳಗೆ ವಿದ್ಯಾರ್ಥಿಗಳ ಸಂಖ್ಯೆಗನುಗುಣವಾಗಿ ಶೌಚಾಲಯ ನಿರ್ಮಾಣ ಮಾಡಿ, ಪ್ರತಿ ಶಾಲೆಯಲ್ಲಿ ಶೌಚಾಲಯ ಇರುವಂತೆ ನೋಡಿಕೊಳ್ಳಬೇಕೆಂದ ಅವರು, ಯಾವುದೇ ಶಾಲೆಯಲ್ಲಿ ಶೌಚಾಲಯ ಇರದೇ ಇದ್ದಲ್ಲಿ ಸಂಬಂಧಿಸಿದವರ ಮೇಲೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವುದಾಗಿ ಅವರು ಈ ಸಂದರ್ಭದಲ್ಲಿ ಎಚ್ಚರಿಕೆ ನೀಡಿದರು.
ಬಿಸಿಯೂಟ : ಮಧ್ಯಾಹ್ನ ಬಿಸಿಯೂಟ ಯೋಜನೆಯಡಿ ಮಕ್ಕಳಿಗೆ ಪೌಷ್ಠಿಕಾಂಶವುಳ್ಳ ಆಹಾರ ಪೂರೈಕೆಯಾಗಬೇಕು. ಸರಿಯಾಗಿ ಕ್ರಮಬದ್ಧವಾಗಿ ಆಹಾರ ಪೂರೈಕೆಯಾಗುವಂತೆ ನೋಡಿಕೊಳ್ಳುವಂತೆ ಅವರು ಸೂಚನೆ ನೀಡಿದರು.
ಮಹಿಳಾ ಮತ್ತು ಮಕ್ಕಳ ಅಬಿವೃದ್ದಿ : ಗರ್ಭೀಣಿ ಮಹಿಳೆ, ಬಾಣಂತಿಯರಿಗೆ ಹಾಗೂ ಮಕ್ಕಳಿಗೆ ಪೌಷ್ಠಿಕ ಆಹಾರ ಸಮಪರ್ಕವಾಗಿ ಒದಗಿಸಬೇಕು. ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಲೋಗಾಂವಿ ಅಂಗನವಾಡಿ ಶಾಲೆ ಜಿಲ್ಲೆಗೆ ಮಾದರಿಯಾಗಿದ್ದು, ಈ ಮಾದರಿಯನ್ನು ಅನುಕರಣೆ ಮಾಡಿ ಜಿಲ್ಲೆಯ ಪ್ರತಿಯೊಂದು ಅಂಗನವಾಡಿಗಳಲ್ಲಿ ಯಾವುದೇ ಕುಂದು-ಕೊರತೆ ಇಲ್ಲದ ಹಾಗೆ ಉತ್ತಮ ವಾತಾವರಣ ಕಲ್ಪಿಸುವÀ ಮೂಲಕ ಜಿಲ್ಲೆಯ ಪ್ರತಿ ಅಂಗನವಾಡಿಗಳು ಕಾರ್ಯನಿರ್ವಹಿಸಬೇಕು ಎಂದು ಹೇಳಿದರು.
ಸಮಾಜ ಕಲ್ಯಾಣ : ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ವಿವಿಧ ವಸತಿ ನಿಲಯಗಳಲ್ಲಿ ಬಾಲಕರಿಗೆ ಹೋಲಿಸಿದಾಗ ಬಾಲಕಿಯರ ಪ್ರವೇಶಾತಿ ಕಡಿಮೆಯಾಗಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಬಾಲಕಿಯರ ಪ್ರವೇಶಾತಿ ಹೆಚ್ಚಳಕ್ಕೆ ಕ್ರಮ ವಹಿಸಬೇಕು. ವಸತಿ ಶಾಲೆಗಳ ಬೇಡಿಕೆ ಹೆಚ್ಚಾಗಿದ್ದು, ಬೇಡಿಕೆಗನುಗುಣವಾಗಿ ವಸತಿ ನಿಲಯಗಳ ಪ್ರಸ್ತಾವನೆ ಸಿದ್ಧಪಡಿಸಿ ಸರ್ಕಾರಕ್ಕೆ ಸಲ್ಲಿಸಲು ಸೂಚನೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಆರೋಗ್ಯ : ಆರೋಗ್ಯ ಇಲಾಖೆ ಅಧಿಕಾರಿಗಳು ಜವಾಬ್ದಾರಿಯಿಮದ ಕಾರ್ಯನಿರ್ವಹಿಸಬೇಕು. ಅಂಬ್ಯೂಲೆನ್ಸ್‍ಗಳನ್ನು ಸಮಪರ್ಕವಾಗಿಟ್ಟುಕೊಳ್ಳಬೇಕು. ವೈದ್ಯರ ಕೊರತೆಯನ್ನು ನಿವಾರಿಸಿಕೊಳ್ಳಬೇಕು. ಜನರಿಗೆ ಯಾವುದೇ ತೊಂದರೆಯಾಗದಂತೆ ಜಿಲ್ಲೆಯಲ್ಲಿ ವೈದ್ಯಕೀಯ ಸೇವೆಯನ್ನು ಒದಗಿಸಬೇಕು. ಸಿಂದಗಿ ತಾಲೂಕಾ ಆಸ್ಪತ್ರೆಯಲ್ಲಿ ಪ್ರಸ್ತೂತಿ ಮತ್ತು ಸ್ತ್ರಿರೋಗ ತಜ್ಞರ ವೈದ್ಯರ ನೇಮಕಾತಿಗೆ ಕ್ರಮ ವಹಿಸುವಂತೆ ಸೂಚನೆ ನೀಡಲಾಯಿತು.
ಅಕ್ರಮ ಮದ್ಯ ಮಾರಾಟ ತಡೆಗೆ ಕ್ರಮ : ಜಿಲ್ಲೆಯಲ್ಲಿ ಅಕ್ರಮ ಮದ್ಯ ಮಾರಾಟ ತಡೆಗಟ್ಟಲು ಸೂಕ್ತ ಕ್ರಮಕೈಗೊಳ್ಳಬೇಕು. ಜಿಲ್ಲೆಯ ವಿವಿಧ ಪಾನಶಾಪ್, ಡಾಭಾ, ಕಿರಾಣಿ ಅಂಗಡಿ, ಮನೆಗಳಲ್ಲಿ ಅಕ್ರಮವಾಗಿ ಮದ್ಯ ಮಾರಾಟವಾಗುವದನ್ನು ತಡೆಗಟ್ಟಲು ಅಗತ್ಯ ಕ್ರಮ ಕೈಗೊಳ್ಳಬೇಕು. ಅಕ್ರಮ ಮದ್ಯ ಮಾರಾಟ ಕಂಡು ಮಂದಲ್ಲಿ ಸಮಬಂಧಿಸಿದ ಅಧಿಕಾರಿಗಳ ಮೇಲೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಎಚ್ಚರಿಕೆ ನೀಡಿದರು.
ಬಡ, ರೈತರ, ಮಹಿಳೆಯರ, ಹಿಂದುಳಿದ, ಅಲ್ಪಸಂಖ್ಯಾತರ ಸೇರಿದಂತೆ ಎಲ್ಲ ವರ್ಗದ ಏಳಿಗೆಗಾಗಿ ನಮ್ಮ ಸರ್ಕಾರಿ ಅನೇಕ ಕಾರ್ಯಕ್ರಮಗಳನ್ನು ರೂಪಿಸಿದ್ದು, ಯಾವುದೇ ಅರ್ಹಫಲಾನುಭವಿಗಳು ಯೋಜನೆಯಿಂದ ವಂಚಿತವಾಗದಂತೆ ನೋಡಿಕೊಳ್ಳಬೇಕು. ಈ ಯೋಜನೆಯಡಿ ಯಾವುದೇ ಲೋಪ, ಅವ್ಯವಹಾರವಾಗದಂತೆ ನೋಡಿಕೊಳ್ಳಬೇಕು. ಯೋಜನೆ ಲಾಭ ಅರ್ಹ ಫಲಾನಬುಭವಿಗಳಿಗೆ ದೊರಕಿಸಲು ಪಕ್ಷಪಾತ, ಬೇಧಾಬಾವ ಮಾಡದೇ ಪ್ತತಿಯೊಬ್ಬ ಅರ್ಹ ಫಲಾನುಭವಿಗಗೆ ಯೋಜನೆ ಲಾಭ ದೊರಕಿಸಲು ಸಮಪರ್ಕವಾಗಿ ಕಾರ್ಯನಿರ್ವಹಿಸುವ ಮೂಲಕ ಸರ್ಕಾರದ 5 ಯೋಜನೆಗಳ ಲಾಭ ದೊರಕಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಸಭೆಯಲ್ಲಿ ಜವಳಿ, ಕಬ್ಬು ಅಭಿವೃದ್ಧಿ, ಹಾಗೂ ಸಕ್ಕರೆ ಮತ್ತು ಕೃಷಿ ಮಾರುಕಟ್ಟೆ ಖಾತೆ ಸಚಿವರಾದ ಶಿವಾನಂದ ಪಾಟೀಲ, ಸಂಸದ ರಮೇಶ ಜಿಗಜಿಣಗಿ, ವಿಧಾನಪರಿಷತ್ ಸದಸ್ಯರಾದ ಪ್ರಕಾಶ ಹುಕ್ಕೇರಿ, ಸಿಂದಗಿ ಶಾಸಕರಾದ ಅಶೋಕ ಮನಗೂಳಿ, ನಾಗಠಾಣ ಶಾಸಕ ವಿಠ್ಠಲ ಕಟಕದೊಂಡ, ರಾಜುಗೌಡ ಪಾಟೀಲ, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ.ರಿಚರ್ಡ್ ವಿನ್ಸೆಂಟ್ ಡಿಸೋಜಾ, ಜಿಲ್ಲಾಧಿಕಾರಿ ಡಾ.ವಿಜಯಮಹಾಂತೇಶ ದಾನಮ್ಮನವರ, ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಎಚ್.ಡಿ.ಆನಂದಕುಮಾರ, ವಲಯ ಅರಣ್ಯಾಧಿಕಾರಿ ಪ್ರಶಾಂತ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಾಹುಲ್ ಶಿಂಧೆ ಸೇರಿದಂತೆ ವಿವಿಧ ಅಧಿಕಾರಿಗಳು ಉಪಸ್ಥಿತರಿದ್ದರು.