
ವಿಜಯಪುರ:ಮಾ.30: ವಿಧಾನಸಭಾ ಚುನಾವಣೆ ಅಂಗವಾಗಿ ಜಾರಿಗೊಂಡಿರುವ ಮಾದರಿ ನೀತಿ ಸಂಹಿತೆಯನ್ನು ಎಲ್ಲ ರಾಜಕೀಯ ಪಕ್ಷಗಳು ಕಟ್ಟುನಿಟ್ಟಾಗಿ ಪಾಲಿಸುವಂತೆ ಜಿಲ್ಲಾ ಚುನಾವಣಾಧಿಕಾರಿಗಳಾದ ಜಿಲ್ಲಾಧಿಕಾರಿ ಡಾ.ವಿಜಯಮಹಾಂತೇಶ ದಾನಮ್ಮನವರ ತಿಳಿಸಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿಂದು ವಿವಿಧ ರಾಜಕೀಯ ಪಕ್ಷಗಳ ಮುಖಂಡರೊಂದಿಗೆ ನಡೆಸಿದ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು, ವಿಧಾನಸಭಾ ಚುನಾವಣೆ ಈಗಾಗಲೇ ಘೋಷಣೆಯಾಗಿದ್ದು, ಮಾದರಿ ನೀತಿ ಸಂಹಿತೆ ಜಾರಿಯಲ್ಲಿದೆ. ಈ ಹಿನ್ನಲೆಯಲ್ಲಿ ಚುನಾವಣಾ ಆಯೋಗವು ಜಾರಿಗೊಳಿಸಿರುವ ನೀತಿ ಸಂಹಿತೆಗಳನ್ನು ತಪ್ಪದೇ ಪಾಲಿಸುವಂತೆ ಅವರು ಸೂಚನೆ ನೀಡಿದರು.
ವಿಧಾನಸಭೆ ಸಾರ್ವತ್ರಿಕ ಚುನಾವಣಾ ವೇಳಾಪಟ್ಟಿಯಂತೆ 2023ರ ಏಪ್ರಿಲ್ 13 ಗುರವಾರದಂದು ಅಧಿಸೂಚನೆ ಹೊರಡಿಸುವುದು. ನಾಮಪತ್ರ ಸಲ್ಲಿಸಲು ಏಪ್ರಿಲ್ 20ರ ಗುರುವಾರ ಕೊನೆಯ ದಿನಾಂಕವಾಗಿದ್ದು, ಏಪ್ರಿಲ್ 21ರ ಶುಕ್ರವಾರ ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ಏಪ್ರಿಲ್ 24ರ ಸೋಮವಾರ ನಾಮಪತ್ರಗಳನ್ನು ಹಿಂತೆಗೆದುಕೊಳ್ಳಲು ಕೊನೆಯ ದಿನವಾಗಿದ್ದು, 2023ರ ಮೇ.10ರ ಬುಧವಾರ ಮತದಾನ ದಿನ, ಮೇ.13ರ ಶನಿವಾರ ಮತ ಎಣಿಕೆ ಹಾಗೂ ದಿನಾಂಕ : 15-05-2023ರ ಸೋಮವಾರದಂದು ಸಂಪೂರ್ಣ ಚುನಾವಣೆ ಪ್ರಕ್ರಿಯೆ ಪೂರ್ಣಗೊಳ್ಳಬೇಕಾದ ದಿನಾಂಕವಾಗಿದೆ ಎಂದು ಹೇಳಿದರು.
ಸಭೆಯಲ್ಲಿ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಎಚ್.ಡಿ.ಆನಂದಕುಮಾರ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಾಹುಲ್ ಶಿಂಧೆ, ಅಪರ ಜಿಲ್ಲಾಧಿಕಾರಿ ಮಹಾದೇವ ಮುರಗಿ ಬಿಜೆಪಿಯ ಶರಣು ಕುಂಬಾರ, ಕಾಂಗ್ರೆಸ್ನ ಚನ್ನಬಸಪ್ಪ ನಂದರಗಿ, ಎಚ್.ಎಸ್.ದಳವಾಯಿ, ಜೆಡಿಎಸ್ನ ರಾಜು ಹಿಪ್ಪರಗಿ, ಬಿಎಸ್ಪಿಯ ಎಂ.ಎಂ.ಮೋಮಿನ, ಎನ್ಸಿಪಿಯ ಝಡ್. ಎನ್.ಇನಾಂದಾರ, ಎ.ಎಸ್.ಖಾಜಿ ಇತರರು ಉಪಸ್ಥಿತರಿದ್ದರು.