
ಕೆಂಗೇರಿ,ಆ.೫:ರಾಮೋಹಳ್ಳಿ ಗ್ರಾಮ ಪಂಚಾಯತಿ ಅಧ್ಯಕ್ಷರಾಗಿ ವೇಣುಗೋಪಾಲ್ ಮತ್ತು ಉಪಾಧ್ಯಕ್ಷರಾಗಿ ಗೌರಮ್ಮ ಕೃಷ್ಣಪ್ಪ ಅವಿರೋಧವಾಗಿ ಆಯ್ಕೆಯಾದರು.
ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಶುಕ್ರವಾರ ಚುನಾವಣೆ ನಡೆಸಲಾಯಿತು. ಯಾವೊಬ್ಬ ಅಭ್ಯರ್ಥಿಯೂ ಉಮೇದುವಾರಿಕೆ ಸಲ್ಲಿಸದ ಹಿನ್ನೆಲೆಯಲ್ಲಿ ಚುನಾವಣಾಧಿಕಾರಿಯಾಗಿ ಕಾರ್ಯ ನಿರ್ವಹಿಸಿದ ವಿಷ್ಣುಕಾಂತ್ ರವರು ೩೩ಸದಸ್ಯ ಬಲದ ಗ್ರಾಮ ಪಂಚಾಯತಿಗೆ ವೇಣುಗೋಪಾಲ್ ಹಾಗೂ ಗೌರಮ್ಮ ಕೃಷ್ಣಪ್ಪ ಅವರನ್ನು ಕ್ರಮವಾಗಿ ಅಧ್ಯಕ್ಷ ಹಾಗೂ ಉಪಾಧ್ಯಕ್ಷರಾಗಿ ಘೋಷಿಸಿದರು.
ನೂತನ ಅಧ್ಯಕ್ಷ ವೇಣುಗೋಪಾಲ್ ಮಾತನಾಡಿ, ಬೆಂಗಳೂರು ನಗರಕ್ಕೆ ಹೊಂದಿಕೊಂಡಂತೆ ಇರುವ ರಾಮೋಹಳ್ಳಿ ಪಂಚಾಯಿತಿಗೆ ಮೂಲ ಸೌಕಯ ಒದಗಿಸುವುದು ಸವಾಲಿನ ಕೆಲಸವಾಗಿದೆ. ಗ್ರಾಮೀಣ ಸೊಗಡನ್ನು ಕಾಪೊಟ್ಟುಕೊಂಡು ಜನರಿಗೆ ನಾಗರಿಕ ಸವಲತ್ತುಗಳನ್ನು ಒದಗಿಸಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದು ಹೇಳಿದರು. ರಾಮೋಹಳ್ಳಿ ಕೆರೆ ರಕ್ಣಣೆ ಎಲ್ಲರ ಜವಾಬ್ದಾರಿಯಾಗಿದೆ. ಕೆರೆಗೆ ಕಲುಷಿತ ನೀರು ಸೇರದಂತೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು. ಗ್ರಾಮ ಪಂಚಾಯಿತಿ ಸದಸ್ಯರು ಹಾಗೂ ಶಾಸಕ ಎಸ್.ಟಿ.ಸೋಮಶೇಖರ್ ಬೆಂಬಲದಿಂದ ಅಧ್ಯಕ್ಷ ಗಾದಿ ಒಲಿದು ಬಂದಿದೆ. ಜನಪರ ಕೆಲಸ ಮಾಡುವ ಗ್ರಾಮ ಪಂಚಾಯತಿ ಅಭಿವೃದ್ಧಿಗೆ ಶ್ರಮಿಸುವುದಾಗಿ ತಿಳಿಸಿದರು.
ರಾಮೋಹಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಸ್ತ್ರೀ ಶಕ್ತಿ ಸಂಘಗಳನ್ನು ಬಲ ಪಡಿಸುವ ಮೂಲಕ ಗ್ರಾಮೀಣ ಮಹಿಳೆಯರ ಆರ್ಥಿಕ ಶಕ್ತಿಯನ್ನು ವೃದ್ಧಿಸಲಾಗುವುದು ಎಂದು ಉಪಾಧ್ಯಕ್ಷೆ ಗೌರಮ್ಮ ಕೃಷ್ಣಪ್ಪ ತಿಳಿಸಿದರು. ಸದಸ್ಯರಾದ ಜಿ ಮಹೇಶ್, ಎಲ್ಲಪ್ಪ ಆರ್, ಎಂ ಚೇತನ್ ಗೌಡ, ರಾಕೇಶ್ ಗೌಡ ಮತ್ತಿತರರು ಉಪಸ್ಥಿತರಿದ್ದು ಶುಭ ಕೋರಿದರು.