ವ್ಯಸನ ಮುಕ್ತ ಸಮಾಜ ನಿರ್ಮಾಣ ನಮ್ಮೆಲ್ಲರ ಹೊಣೆಗಾರಿಕೆ: ನ್ಯಾ. ರಾಜೇಶ್ವರಿ ಎನ್. ಹೆಗಡೆ

ದಾವಣಗೆರೆ.ಮೇ.೩೧: ದೇಶದಲ್ಲಿ ಶೇಕಡ 22ರಷ್ಟು ಯುವ ಜನತೆ ತಂಬಾಕು ವ್ಯಸನಿಗಳಾಗಿದ್ದು, ವಿವಿಧ ಚಟಗಳಿಗೆ ದಾಸರಾಗಿದ್ದಾರೆ. ಕಾರಣ ವ್ಯಸನ ಮುಕ್ತ ಸಮಾಜ ನಿರ್ಮಾಣ ಮಾಡಬೇಕಾಗಿರುವುದು ನಮ್ಮೆಲ್ಲರ ಹೊಣೆಗಾರಿಕೆ ಆಗಿದೆ. ಈ ಬಗ್ಗೆ ಸಾರ್ವಜನಿಕರು ಅದರಲ್ಲೂ ದೃಶ್ಯ ಮತ್ತು ಮುದ್ರಣ ಮಾಧ್ಯಮಗಳು ಹೆಚ್ಚು ಜಾಗೃತಿ ಮೂಡಿಸಬೇಕಾಗಿದೆ ಎಂದು ದಾವಣಗೆರೆ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ರಾಜೇಶ್ವರಿ ಎನ್. ಹೆಗಡೆಯವರು ಕರೆ ನೀಡಿದರು.ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ದಾವಣಗೆರೆ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಸರ್ವೇಕ್ಷಣಾಧಿಕಾರಿಗಳ ಕಛೇರಿ, ಜಿಲ್ಲಾ ತಂಬಾಕು ನಿಯಂತ್ರಣ ಕೋಶ, ಜಿಲ್ಲಾ ವಕೀಲರ ಸಂಘ, ಎನ್.ಪಿ.ಸಿ. ಘಟಕ ಹಾಗೂ ಕರುಣಾ ಜೀವ ಕಲ್ಯಾಣ ಟ್ರಸ್ಟ್ ದಾವಣಗೆರೆ ಇವರ ಸಂಯುಕ್ತಾಶ್ರಯದಲ್ಲಿ ನಗರದ ಚಿಗಟೇರಿ ಜಿಲ್ಲಾ ಆಸ್ಪತ್ರೆ ಆವರಣದಲ್ಲಿ ಆಯೋಜಿಸಲಾಗಿದ್ದ ವಿಶ್ವ ತಂಬಾಕು ರಹಿತ ದಿನದ ಜಾಥಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.ತಂಬಾಕು ಬೆಳೆಯುವ ರೈತರಿಗೆ ಪರ್ಯಾಯ ಬೆಳೆಯಲು ಪ್ರೋತ್ಸಾಹ ನೀಡಬೇಕು. ಅಲ್ಲದೆ ಉತ್ಪಾದನೆಗೆ ಸಹಕಾರ ನೀಡಬೇಕು. ಮಾತ್ರವಲ್ಲದೆ ಮಾರುಕಟ್ಟೆಗೆ ಕುರಿತಂತೆ ಅವರಿಗೆ ಮಾರ್ಗದರ್ಶನ ನೀಡಬೇಕು. ಮಾತ್ರವಲ್ಲದೆ ತಂಬಾಕು ಬೆಳೆಯಿಂದ ಆಗುವ ದುಷ್ಪರಿಣಾಮಗಳ ಬಗ್ಗೆ ಅರಿವು ಮೂಡಿಸುವುದು ನಮ್ಮೆಲ್ಲರ ಅಗತ್ಯವಾಗಿದೆ ಎಂದು ಹೇಳಿದರು.ವಿಶ್ವ ಆರೋಗ್ಯ ಸಂಸ್ಥೆಯು 1987ರಿಂದ ವಿಶ್ವ ತಂಬಾಕು ಕುರಿತ ದಿನಾಚರಣೆಯನ್ನು ಆಚರಿಸುತ್ತಾ ಬರುತ್ತಿದೆ. ಈ ವರ್ಷದ ಘೋಷ ವಾಕ್ಯ ನಮಗೆ ಆಹಾರ ಬೇಕು ತಂಬಾಕು ಬೇಡ ಎನ್ನುವುದಾಗಿದೆ. ಜೊತೆಗೆ ತಂಬಾಕಿನಿಂದ ಆಗುವ ದುಷ್ಪರಿಣಾಮಗಳು, ಸಾವು ನೋವುಗಳು ಮತ್ತು ವಿವಿಧ ಅಸಾಂಕ್ರಮಿಕ ರೋಗಗಳ ಬಗ್ಗೆ ಕುರಿತು ಸಾರ್ವಜನಿಕರಲ್ಲಿ ಅರಿವು ನಮ್ಮೆಲ್ಲರ ಆದ್ಯ ಕರ್ತವ್ಯ ಎಂದು ಹೇಳಿದರು.ಪ್ರಾಸ್ತಾವಿಕಕವಾಗಿ ಮಾತನಾಡಿದ ದಾವಣಗೆರೆ ಜಿಲ್ಲಾ ಸರ್ವೇಕ್ಷಣ ಅಧಿಕಾರಿ ಡಾ.ಜಿ.ಡಿ.ರಾಘವನ್, ಕರ್ನಾಟಕದಲ್ಲಿ ಶೇಕಡ 51.7ರಷ್ಡು ತಂಬಾಕು ವ್ಯಸನಗಳಿದ್ದು ಮತ್ತು ಶೇಕಡ 63.9 ರಷ್ಟು ಹೊಗೆರಹಿತ ತಂಬಾಕು ಬಳಕೆದಾರರಿದ್ದಾರೆ. ಇವರಿಗೆ ತಂಬಾಕು ಸೇವನೆಯಿಂದ ಆಗುವ ದುಷ್ಪರಿಣಾಮಗಳ ಬಗ್ಗೆ ತಿಳಿಸಿ ತಂಬಾಕು ತ್ಯಜಿಸುವಂತೆ ಇಲಾಖೆ ಜಾಗೃತಿ ಮೂಡಿಸುತ್ತಾ ಬರುತ್ತಿದೆ ಎಂದರು.ರಾಜ್ಯದಲ್ಲಿ ತಂಬಾಕು ವ್ಯಸನಗಳಿಗೆ ಆಪ್ತ ಸಮಾಲೋಚನೆ ಮಾಡುವ ಮೂಲಕ ಅವರ ಮನಸ್ಥಿತಿಯನ್ನು ಬಲಪಡಿಸಿ, ದುಷ್ಪರಿಣಾಮಗಳ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಬೇಕು. ತಂಬಾಕು ಬಳಕೆಯನ್ನು ಕಡಿಮೆ ಮಾಡಿ ಪೌಷ್ಟಿಕ ಆಹಾರಗಳ ಬಳಕೆಯನ್ನು ಹೆಚ್ಚಿಸುವ ಮೂಲಕ ಆರೋಗ್ಯವಂತ ಸಮಾಜ ನಿರ್ಮಾಣ ಮಾಡುವುದೇ ದಿನಾಚರಣೆಯ ಮುಖ್ಯ ಉದ್ದೇಶವಾಗಿದೆ ಎಂದು ಹೇಳಿದರು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ದಾವಣಗೆರೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ನಾಗರಾಜ್ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ದಾವಣಗೆರೆ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ, ಹಿರಿಯ ಸಿವಿಲ್ ನ್ಯಾಯಾಧೀಶ ಮಹಾವೀರ ಎಂ. ಕರೆಣ್ಣವರ್, ದಾವಣಗೆರೆ ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಎಲ್. ಹೆಚ್. ಅರುಣ್ ಕುಮಾರ್, ಜಿಲ್ಲಾಸ್ಪತ್ರೆಯ ಶಸ್ತ್ರಚಿಕಿತ್ಸಕ ಡಾ.ಎಸ್.ಸುಭಾಷ್ ಚಂದ್ರ, ಶಿವನಕೆರೆ ಬಸವಲಿಂಗಪ್ಪ ಸೇರಿದಂತೆ ಜಿಲ್ಲಾ, ತಾಲ್ಲೂಕು ಮಟ್ಟದ ಅಧಿಕಾರಿಗಳು ಇತರರು ಇದ್ದರು.