
ಕಲಬುರಗಿ,ಮಾ.30: ನಗರದ ಪತ್ರಿಕಾ ಭವನದ ಸಭಾಂಗಣದಲ್ಲಿ ಏಪ್ರಿಲ್ 1ರಂದು ಬೆಳಿಗ್ಗೆ 11-30ಕ್ಕೆ ತುಮಕೂರು ಶ್ರೀ ಸಿದ್ಧಗಂಗಾ ಮಠದ ಕರ್ನಾಟಕ ರತ್ನ ಡಾ. ಶಿವಕುಮಾರ್ ಮಹಾಸ್ವಾಮಿಗಳ 116ನೇ ಗುರುವಂದನಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ವೀರಶೈವ ಸಮಾಜ ಹಾಗೂ ಶ್ರೀ ಸಿದ್ಧಗಂಗಾ ಹಳೆಯ ವಿದ್ಯಾರ್ಥಿಗಳ ಹಾಗೂ ಹಿತೈಷಿಗಳ ಸಂಘದ ಅಧ್ಯಕ್ಷ ಅರುಣಕುಮಾರ್ ಪಾಟೀಲ್ ಕೊಡಲಹಂಗರಗಾ ಅವರು ಹೇಳಿದರು.
ನಗರದ ಪತ್ರಿಕಾ ಭವನದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ 16 ವರ್ಷಗಳಿಂದ ಜಿಲ್ಲೆಯಲ್ಲಿ ಶ್ರೀಗಳ ಜನ್ಮದಿನಾಚರಣೆ ಆಚರಿಸಿಕೊಂಡು ಬರಲಾಗುತ್ತಿದೆ. ಪ್ರತಿ ವರ್ಷದಂತೆ ಸಂಘದಿಂದ ಕೊಡಮಾಡುವ ಸಿದ್ಧಗಂಗಾ ಶ್ರೀ ಮತ್ತು ಶಿವಕುಮಾರ್ ಶ್ರೀ ಪ್ರಶಸ್ತಿಯನ್ನು ಈ ಬಾರಿ ಕ್ರಮವಾಗಿ ಶ್ರೀ ಶರಣಬಸವೇಶ್ವರ್ ವಿದ್ಯಾವರ್ಧಕ ಸಂಘದ ಚೇರಪರ್ಸ್ನ್ ಮಾತೋಶ್ರೀ ದಾಕ್ಷಾಯಣಿ ಅಪ್ಪ ಹಾಗೂ ಗುಲಬರ್ಗಾ ವೈದ್ಯಕೀಯ ವಿಜ್ಞಾನ ಸಂಸ್ಥೆಯ ನಿರ್ದೇಶಕಿ ಹಾಗೂ ಡೀನ್ ಡಾ. ಕವಿತಾ ಪಾಟೀಲ್ ಅವರಿಗೆ ನೀಡಿ ಗೌರವಿಸಲಾಗುವುದು ಎಂದರು.
ಕಾರ್ಯಕ್ರಮದ ಸಾನಿಧ್ಯವನ್ನು ಸಾರಂಘಮಠ, ಸುಲಫಲಮಠದ ಡಾ. ಸಾರಂಗಧರ್ ದೇಶಿಕೇಂದ್ರ ಮಹಾಸ್ವಾಮಿಗಳು ವಹಿಸುವರು. ಮುಖ್ಯ ಅತಿಥಿಗಳಾಗಿ ಗುಲಬರ್ಗಾ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ದಯಾನಂದ್ ಅಗಸರ್ ಅವರು ಆಗಮಿಸುವರು ಎಂದು ಅವರು ತಿಳಿಸಿದರು.
ಇತ್ತೀಚೆಗೆ ನೂತನವಾಗಿ ಆಯ್ಕೆಯಾದ ಹೈದ್ರಾಬಾದ್ ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯ ಅಧ್ಯಕ್ಷ ಶಶಿಕಾಂತ್ ಪಾಟೀಲ್ ಸೇರಿ ಎಲ್ಲ ಪದಾಧಿಕಾರಿಗಳಿಗೆ ಸನ್ಮಾನಿಸಲಾಗುವುದು. ಅಲ್ಲದೇ ಮಾಧ್ಯಮ ಕ್ಷೇತ್ರದಲ್ಲಿ ವಿಶೇಷ ಸಾಧನೆ ಮಾಡಿದ ಕರ್ನಾಟಕ ಮಾಧ್ಯಮ ಅಕ್ಯಾಡೆಮಿ ಪ್ರಶಸ್ತಿ ಪುರಸ್ಕøತರಾದ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಬಾಬುರಾವ್ ಯಡ್ರಾಮಿ, ದೇವಿಂದ್ರಪ್ಪ ಅವಂಟಿ, ಹಣಮಂತರಾಯ್ ಭೈರಾಮಡಗಿ, ಶರಣಯ್ಯ ಹಿರೇಮಠ್, ಶಿವರಾಯ್ ದೊಡ್ಡಮನಿ, ನಜೀರಮಿಯಾ ಹಟ್ಟಿ ಹಾಗೂ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ದತ್ತಿ ಪ್ರಶಸ್ತಿ ಪುರಸ್ಕøತ ಜಯತೀರ್ಥ ಪಾಟೀಲ್, ಪ್ರವೀಣ್ ಪಾರಾ, ಮಂಜುನಾಥ್ ಜೂಟಿ ಅವರಿಗೆ ವಿಶೇಷವಾಗಿ ಸನ್ಮಾನಿಸಲಾಗುವುದು ಎಂದು ಅವರು ಹೇಳಿದರು.
ಇದೇ ಸಂದರ್ಭದಲ್ಲಿ ನಗರದ ನಂದಗೋಕುಲದ ಶಿಶು ವಿಹಾರ ಮಕ್ಕಳಿಗೆ ಹಣ್ಣು, ಹಂಪಲಗಳನ್ನು ವಿತರಿಸುವ ಮೂಲಕ ಶ್ರೀಗಳ ಗುರುವಂದನಾ ಕಾರ್ಯಕ್ರಮ ಆಚರಿಸಲಾಗುವುದು ಎಂದು ಅವರು ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಕಲ್ಯಾಣಪ್ಪ ಪಾಟೀಲ್, ತಾಲ್ಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಸಂಗಮೇಶ್ ನಾಗನಳ್ಳಿ,ಸ ಚನ್ನಬಸಯ್ಯ ಗುರುವಿನ್, ದೇವೆಂದ್ರಪ್ಪ ಅವಂಟಿ ಮುಂತಾದವರು ಉಪಸ್ಥಿತರಿದ್ದರು.