
ನವದೆಹಲಿ, ಮಾ, ೧೧ – ಸಾಂವಿಧಾನಿನ ಸಂಸ್ಥೆಗಳನ್ನು ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಅಧಿಕಾರ ದುರುಪಯೋಗ ಪಡಿಸಿಕೊಳ್ಳುತ್ತಿದೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಗಂಬೀರ ಆರೋಪ ಮಾಡಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರು ಜಾರಿ ನಿರ್ದೇಶನಾಲಯ, ಸಿಬಿಐ, ಆದಾಯ ತೆರಿಗೆ ಸೇರಿದಂತೆ ಮತ್ತಿತರ ತನಿಖಾ ಸಂಸ್ಥೆಗಳನ್ನು ವಿರೋಧ ಪಕ್ಷಗಳನ್ನು ಹತ್ತಿಕ್ಕಲು ದುರುಪಯೋಗ ಮಾಡಿಕೊಳ್ಳುತ್ತಿದೆ ಎಂದು ದೂರಿದ್ದಾರೆ.
ಸಾಂವಿಧಾನಿಕ ಸಂಸ್ಥೆಗಳನ್ನು ದುರುಪಯೋಗಪಡಿಸಿಕೊಳ್ಳುವ ಮೂಲಕ ಪ್ರಜಾಪ್ರಭುತ್ವವನ್ನು ಕೇಂದ್ರ ಸರ್ಕಾರ ಕೊಲ್ಲುವ ಕೆಟ್ಟ ಪ್ರಯತ್ನ ಮಾಡುತ್ತಿದೆ ಎಂದು ಹರಿಹಾಯ್ದಿದ್ದಾರೆ.ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ವಾಧಿಕಾರಕ್ಕೆ ಸಾರ್ವಜನಿಕರು ತಕ್ಕ ಪ್ರತ್ಯುತ್ತರ ನೀಡಲಿದ್ದಾರೆ ಎಂದು ಅವರು ವಾಗ್ದಾಳಿ ನಡೆಸಿದ್ದಾರೆ.ಬಿಹಾರದ ಉಪಮುಖ್ಯಮಂತ್ರಿ ತೇಜಸ್ವಿ ಯಾದವ್ ಅವರ ಮನೆಯಲ್ಲಿ ಕಳೆದ ೧೪ ಗಂಟೆಗಳಿಂದ ಸಿಬಿಐ ,ಜಾರಿ ನಿರ್ದೇಶನಾಲಯ ದಾಳಿ ನಡೆಸುವ ಮೂಲಕ ತೇಜಸ್ವಿ ಅವರ ಗರ್ಭಿಣಿ ಪತ್ನಿ ಮತ್ತು ಸಹೋದರಿಯರಿಗೆ ಕಿರುಕುಳ ನೀಡಲಾಗುತ್ತಿದೆ. ಲಾಲು ಪ್ರಸಾದಅವರಿಗೆ ವಯಸ್ಸಾಗಿದೆ, ಅವರು ಅನಾರೋಗ್ಯದಿಂದ ಬಳಲುತ್ತಿದ್ದಾರೆ, ಆಗಲೂ ಮೋದಿ ಸರ್ಕಾರ ಅವರ ಬಗ್ಗೆ ಮಾನವೀಯತೆ ತೋರಲಿಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ.
ಉದ್ಯೋಗಕ್ಕಾಗಿ ಭೂ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ರಾಜಧಾನಿಯಲ್ಲಿರುವ ಬಿಹಾರದ ಉಪ ಮುಖ್ಯಮಂತ್ರಿ ಮತ್ತು ಆರ್ಜೆಡಿ ನಾಯಕ ತೇಜಸ್ವಿ ಯಾದವ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ದಾಳಿ ನಡೆಸಿತು.
“ದೇಶದಿಂದ ಕೋಟಿಗಟ್ಟಲೆ ಹಣದೊಂದಿಗೆ ಪರಾರಿಯಾಗಿರುವ ಉದ್ಯಮಿಗಳನ್ನು ತಡೆಯಲಾಗದ ಮೋದಿ ಸರಕಾರದ ಏಜೆನ್ಸಿಗಳು ಎಲ್ಲಿದ್ದವು ಎಂದು ಪ್ರಶ್ನಿಸಿರುವ ಅವರು ಮೋದಿ ಅವರ ‘ಆತ್ಮೀಯ ಗೆಳೆಯ’ ಸಂಪತ್ತು ಇರುವಾಗ ಏಕೆ ತನಿಖೆ ನಡೆಸುತ್ತಿಲ್ಲ ಎಂದು ಖರ್ಗೆ ಪ್ರಶ್ನಿಸಿದ್ದಾರೆ.