
ಗದಗ, ಮೇ 20: 2023 ನೇ ಸಾಲಿನ ಇಂಜನೀಯರಿಂಗ್, ಕೃಷಿ ವಿಜ್ಞಾನ ಮುಂತಾದ ವೃತ್ತಿಪರ ಕೋರ್ಸುಗಳ ಪ್ರವೇಶಕ್ಕಾಗಿ ಜಿಲ್ಲೆಯಲ್ಲಿ ಸಾಮಾನ್ಯ ಪ್ರವೇಶ ಪರೀಕ್ಷೆಗಳು ಮೇ 20 ಹಾಗೂ 21 ರಂದು 10 ಪರೀಕ್ಷಾ ಕೇಂದ್ರಗಳಲ್ಲಿ ಜರುಗಲಿವೆ. ಸಾಮಾನ್ಯ ಪ್ರವೇಶಪರೀಕ್ಷೆಗಳನ್ನು ಯಾವುದೇ ಲೋಪದೋಷಗಳಿಲ್ಲದಂತೆ ವ್ಯವಸ್ಥಿತವಾಗಿ ಜರುಗಿಸಲು ಕ್ರಮ ವಹಿಸಬೇಕೆಂದು ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್. ತಿಳಿಸಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸಾಮಾನ್ಯ ಪ್ರವೇಶ ಪರೀಕ್ಷೆ ಕುರಿತು ಪೂರ್ವಸಿದ್ಧತೆ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಪರೀಕ್ಷೆಗಳನ್ನು ಇಲಾಖೆ ಪರೀಕ್ಷಾ ಮಾರ್ಗಸೂಚಿಯಂತೆ ನಿಯಮಾನುಸಾರ ನಡೆಸಬೇಕು. ಪರೀಕ್ಷಾ ವೇಳೆ ಯಾವುದೇ ಅಕ್ರಮಕ್ಕೆ ಆಸ್ಪದ ನೀಡಬಾರದು. ಪರೀಕ್ಷಾ ಕೇಂದ್ರದಲ್ಲಿ ಅಕ್ರಮ ನಡೆದಲ್ಲಿ ಕೇಂದ್ರದ ಮುಖ್ಯಸ್ಥರನ್ನೇ ನೇರ ಹೊಣೆಗಾರರನ್ನಾಗಿ ಮಾಡಲಾಗುವುದು. ಪರೀಕ್ಷಾ ಕೇಂದ್ರದ ಮುಖ್ಯಸ್ಥರು ಶಿಸ್ತು ಬದ್ಧ, ನ್ಯಾಯಸಮ್ಮತ, ಪಾರದರ್ಶಕ ಪರೀಕ್ಷೆ ನಡೆಯುವಂತೆ ಹೆಚ್ಚಿನ ನಿಗಾ ವಹಿಸಬೇಕೆಂದು ಸೂಚಿಸಿದರು.
ಪರೀಕ್ಷಾ ಕೇಂದ್ರದಲ್ಲಿ ಯಾವುದೇ ತರಹದ ಮೊಬೈಲ್ , ಎಲೆಕ್ಟ್ರಾನಿಕ್ಸ ಡಿವೈಸ್ ತರಲು ಯಾರಿಗೂ ಅವಕಾಶ ಇಲ್ಲ. ಪರೀಕ್ಷಾ ಕೇಂದ್ರದ ಸುತ್ತ ಅಹಿತಕರ ಘಟನೆಗಳು ಹಾಗೂ ಅಕ್ರಮಗಳು ನಡೆಯದಿರಲು ಮುಂಜಾಗ್ರತಾ ಕ್ರಮವಾಗಿ 200 ಮೀಟರ್ ಪ್ರದೇಶದಲ್ಲಿ ಪ್ರತಿಬಂಧಕಾಜ್ಞೆ ಜಾರಿಗೊಳೀಸಲಾಗಿದೆ. ಈ ಪ್ರತಿಬಂಧಕಾಜ್ಞೆಯನ್ನು ಪರೀಕ್ಷಾ ಕೇಂದ್ರಕ್ಕೆ ನಿಯೋಜಿಸಲಾದ ಅಧಿಕಾರಿಗಳು ಹಾಗೂ ಪೆÇಲೀಸ ಇಲಾಖೆ ಅಧಿಕಾರಿ ಸಿಬ್ಬಂದಿಗಳು ಕಟ್ಟುನಿಟ್ಟಾಗಿ ಪಾಲಿಸುವಂತೆ ತಿಳಿಸಿದರು.
ಜಿಲ್ಲೆಯಲ್ಲಿ ಸುಗಮ ಪರೀಕ್ಷೆ ಜರುಗಿಸಲು ನಿಯೋಜಿಸಲಾದ ಅಧಿಕಾರಿ ಸಿಬ್ಬಂದಿಗಳು ನಿಷ್ಕಾಳಜಿ ತೋರದೇ ಶಿಸ್ತು ಬದ್ಧ ಕಾರ್ಯನಿರ್ವಹಣೆ ಮಾಡುವ ಮೂಲಕ ಸುಗಮ ಪರೀಕ್ಷೆಗಳು ಜಿಲ್ಲೆಯ 10 ಪರೀಕ್ಷಾ ಕೇಂದ್ರಗಳ್ಲಿ ಜರುಗುವಂತೆ ಕಾರ್ಯನಿರ್ವಹಿಸಬೇಕು. ಈ ಕರ್ತವ್ಯದಲ್ಲಿ ನಿಷ್ಕಾಳಜಿ ಸಹಿಸಲಾಗದು ಎಂದರು.
ಪರೀಕ್ಷಾ ಕೇಂದ್ರಗಳಲ್ಲಿ ಕುಡಿಯುವ ನೀರು, ವಿದ್ಯುಚ್ಛಕ್ತಿ, ಪರೀಕ್ಷಾರ್ಥಿಗಳಿಗೆ ಸೂಕ್ತ ಆಸನದ ವ್ಯವಸ್ಥೆ ಇರುವಂತೆ ನೋಡಿಕೊಳ್ಳಬೇಕು. ಪರೀಕ್ಷಾ ಸಮಯದಲ್ಲಿ ನಕಲು ಮಾಡುವುದು, ಪರೀಕ್ಷಾರ್ಥಿಗಳ ಬದಲು ಬೇರೆಯವರು ಪರೀಕ್ಷೆಗೆ ಹಾಜರಾಗುವುದು ಮುಂತಾದ ಅವ್ಯವಹಾರ ತಡೆಗಟ್ಟಲು ಹಾಗೂ ಪರೀಕ್ಷಾ ಕೇಂದ್ರಗಳಲ್ಲಿ ಶಿಸ್ತು ಮತ್ತು ಶಾಂತಿ ಕಾಪಾಡಲು ಅಗತ್ಯ ಕ್ರಮ ಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್. ನಿರ್ದೇಶನ ನೀಡಿದರು.
ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಎಸ್.ಜಿ. ಕರಿಸಿದ್ದಪ್ಪ ಮಾತನಾಡಿ ಮೇ 20 ರಿಂದ 21 ರವರೆಗೆ ಜಿಲ್ಲೆಯ 10 ಪರೀಕ್ಷಾ ಕೇಂದ್ರಗಳಲ್ಲಿ ಸಾಮಾನ್ಯ ಪ್ರವೇಶ ಪರೀಕ್ಷೆಗಳು ಜರುಗಲಿದ್ದು ಒಟ್ಟು 2919 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಲಿದ್ದಾರೆ. ಮೇ 20 ರಂದು ಬೆ 10.30 ಯಿಂದ ಬೆ 11.50 ಗಂಟೆಯವರೆಗೆ ಜೀವಶಾಸ್ತ್ರ , ಅದೇ ದಿನ ಮ.2.30 ರಿಂದ 3.50 ರವರೆಗೆ ಗಣಿತ, ಮೇ 21 ರಂದು ಬೆ 10.30 ಯಿಂದ 11.50 ರವರೆಗೆ ಭೌತಶಾಸ್ತ್ರ, ಮ. 2.30 ರಿಂದ 3.50 ರವರೆಗೆ ರಸಾಯನಶಾಸ್ತ್ರ ಪರೀಕ್ಷೆಗಳು ಜರುಗಲಿವೆ. ಪರೀಕ್ಷೆಗಳನ್ನು ಸುವ್ಯವಸ್ಥಿತವಾಗಿ ಜರುಗಿಸಲು ಸಕಲ ಸಿದ್ಧತೆಗೆ ಕ್ರಮ ವಹಿಸಲಾಗಿದೆ ಎಂದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಮಾರುತಿ ಎಂ.ಪಿ, ಪರೀಕ್ಷಾ ಕೇಂದ್ರಗಳ ಮುಖ್ಯಸ್ಥರು, ವಿವಿಧ ಇಲಾಖೆಯ ಅಧಿಕಾರಿಗಳು ಹಾಜರಿದ್ದರು.