
ಕಲಬುರಗಿ:ನ.13:ಕಲಬುರಗಿ ನಗರಕ್ಕೆ ನೀರು ಸರಬರಾಜು ಮಾಡುವ ಜಲ ಮೂಲ ನದಿಯಾದ ಭೀಮಾ ನದಿಯಿಂದ ಕಲುಷಿತ ನೀರು ಬರುತ್ತಿದ್ದು, ಕುಡಿಯುವ ನೀರನ್ನು ಶುದ್ಧೀಕರಿಸಿ, ಸೂಪರ್ ಕ್ಲೋರಿನೇಶನ್ ಮಾಡಿ ನೀರು ಸರಬರಾಜು ಮಾಡಲಾಗುತ್ತಿದೆ. ಆದ್ಯಾಗೂ ಸಹ ಕಲಬುರಗಿ ನಗರದ ಸಾರ್ವಜನಿಕರು ಮುನ್ನೆಚ್ಚರಿಕೆ ಕ್ರಮವಾಗಿ ಕುಡಿಯುವ ನೀರನ್ನು ಕಾಯಿಸಿ, ಆರಿಸಿ ಮತ್ತು ಸೊಸಿ ಕುಡಿಯಬೇಕೆಂದು ಕೆಯುಡಬ್ಲ್ಯೂಎಸ್ಎಂಪಿ, ಕೆಯುಐಡಿಎಫ್ಸಿ ಕಲಬುರಗಿ ಯೋಜನಾ ಅನುಷ್ಠಾನ ಘಟಕದ ಕಾರ್ಯಪಾಲಕ ಅಭಿಯಂತರರು ತಿಳಿಸಿದ್ದಾರೆ.
ನಗರದ ಸಾರ್ವಜನಿಕರು ತಮ್ಮ ಮನೆಗಳಿಗೆ ತೆಗೆದುಕೊಂಡು ನಳದ ಜೋಡಣೆಗೆ ತೊಟ್ಟಿಯನ್ನು ಕಡ್ಡಾಯವಾಗಿ ಕೂಡಿಸಿಕೊಳ್ಳಬೇಕು ಮತ್ತು ನಳದ ತಗ್ಗುಗಳನ್ನು ಮುಚ್ಚಬೇಕು. ಏಕೆಂದರೆ ತಗ್ಗುಗಳಲ್ಲಿ ಕಲುಷಿತ ನೀರು ಸಂಗ್ರಹಣೆಯಾಗಿ ಅದೇ ನೀರು ಮತ್ತೆ ನಳದ ತೊಟ್ಟಿಯಲ್ಲಿ ಸೇರುವ ಮೂಲಕ ಮುಂದಿನ ಗ್ರಾಹಕರಿಗೆ ತಲುಪುತ್ತದೆ. ಇದರಿಂದ ಕೂಡಾ ಸಾಂಕ್ರಾಮಿಕ ರೋಗ ಹರಡುವ ಸಂಭವ ಇರುತ್ತದೆ. ಇದರಿಂದ ನೀರು ಪೋಲಾಗದಂತೆ ನೋಡಿಕೊಳ್ಳಬಹುದಾಗಿದೆ.
ಆದ್ದರಿಂದ ಸಾರ್ವಜನಿಕರು ಕಲಬುರಗಿ ಮಹಾನಗರ ಪಾಲಿಕೆಗೆ, ಕೆಯುಐಡಿಎಫ್ಸಿ ಹಾಗೂ ಮೆ|| ಎಲ್ ಆಂಡ್ ಟಿ ಲಿಮಿಟೆಡ್ ಇವರೊಂದಿಗೆ ಸಹಕರಿಸಬೇಕೆಂದು ಅವರು ತಿಳಿಸಿದ್ದಾರೆ.