ಸೈಬರ್ ಅಪರಾಧ ಪತ್ತೆಗೆ ಪ್ರತ್ಯೇಕ ವಿಂಗ್ ರಚನೆ

ಬೆಂಗಳೂರು,ಜೂ.೨೧-ಸೈಬರ್ ಅಪರಾಧಗಳ ತ್ವರಿತಗತಿಯಲ್ಲಿ ಪತ್ತೆ ಮಾಡಲು ರಾಜ್ಯದ ಎಲ್ಲಾ ಠಾಣೆಗಳಲ್ಲೂ ಪ್ರತ್ಯೇಕ ಸೈಬರ್ ವಿಂಗ್ ರಚಿಸಲಾಗುವುದು ಎಂದು ಗೃಹ ಸಚಿವ ಡಾ. ಜಿ ಪರಮೇಶ್ವರ್ ಅವರು ತಿಳಿಸಿದ್ದಾರೆ.
ಗೂಗಲ್, ಫೇಸ್ ಬುಕ್, ಟ್ವಿಟರ್ ಸೇರಿದಂತೆ ಸಾಮಾಜಿಕ ಜಾಲತಾಣದ ಮುಖ್ಯಸ್ಥರ ಸಭೆ ಕರೆಯಲಾಗುತ್ತಿದೆ. ಫೇಕ್ ಸುದ್ದಿ ಹರಿಬಿಡುವವರ ಸಂಖ್ಯೆ ದಿನೇ ದಿನೇ ಹೆಚ್ಚಾಗುತ್ತಿದೆ. ಇದಕ್ಕೆ ಮೊದಲು ಕಡಿವಾಣ ಹಾಕಲಾಗುವುದು ಎಂದರು.
ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ಯಾರು ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸುದ್ದಿ ಹರಿಬಿಡುತ್ತಾರೋ ಅವರ ವಿರುದ್ಧ ಕ್ರಮಕೈಗೊಳ್ಳಲಾಗುವುದು. ಯಾವುದೇ ಪಕ್ಷ, ಸಂಘಟನೆ ಇರಲಿ ಕ್ರಮ ನಿಶ್ಚಿತ. ಈಗಿರುವ ರಾಜ್ಯದ ಎಲ್ಲಾ ಠಾಣೆಗಳಲ್ಲೂ ಪ್ರತ್ಯೇಕ ಸೈಬರ್ ವಿಂಗ್ ರಚಿಸಲಾಗುವುದು. ಸುಳ್ಳು ಸುದ್ದಿ ಹರಿಬಿಡುವವರ ಸಂಖ್ಯೆ ದಿನೇ ದಿನೇ ಹೆಚ್ಚಾಗುತ್ತಿದ್ದು, ಇದಕ್ಕೆ ಮೊದಲು ಕಡಿವಾಣ ಹಾಕಲಾಗುವುದು, ಯಾರು ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸುದ್ದಿ ಹರಿಬಿಡುತ್ತಾರೆ ಅವರ ವಿರುದ್ಧ ಕ್ರಮಕೈಗೊಳ್ಳಲಾಗುವುದು ಎಂದು ಕಡಕ್ ಸೂಚನೆ ನೀಡಿದರು.
ಸುಳ್ಳು ಸುದ್ದಿ ಮೂಲಗಳನ್ನು ಪತ್ತೆ ಹಚ್ಚಿ ಅವುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಡಿಸುತ್ತಿರುವವರನ್ನು ಗುರುತಿಸಿ ಕಾನೂನು ಕ್ರಮಕ್ಕೆ ಒಳಪಡಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ್ದಾರೆ. ಇಂದು ತಮ್ಮನ್ನು ಭೇಟಿ ಮಾಡಿದ ಗೃಹ ಸಚಿವ ಜಿ.ಪರಮೇಶ್ವರ್ ಅವರ ಜತೆಗೂ ಈ ಬಗ್ಗೆ ಸಿಎಂ ವಿವರವಾಗಿ ಚರ್ಚಿಸಿದ್ದರು.
೨೦೧೩ರಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರುತ್ತಿದ್ದಂತೆ ಸುಳ್ಳು ಸುದ್ದಿ ಹಾವಳಿ ಹೆಚ್ಚಾಗಿತ್ತು. ಈ ಬಾರಿ ಕೂಡ ಅದೇ ತಂತ್ರವನ್ನು ರಾಜಕೀಯ ವಿರೋಧಿಗಳು ಅನುಸರಿಸುತ್ತಿದ್ದಾರೆ. ಲೋಕಸಭಾ ಚುನಾವಣೆ ಹತ್ತಿರ ಬರುತ್ತಿರುವುದರಿಂದ ಮಾಮೂಲಿಯಂತೆ ಸುಳ್ಳು ಸುದ್ದಿ ಹೆಚ್ಚೆಚ್ಚು ಸೃಷ್ಟಿಸಿ ಸಮಾಜದಲ್ಲಿ ಅಶಾಂತಿ ಸೃಷ್ಟಿಸಲು ಪ್ರಯತ್ನಿಸುವ ಸಾಧ್ಯತೆಗಳು ಹೆಚ್ಚಾಗಿವೆ. ಹೀಗಾಗಿ ಆರಂಭದಲ್ಲೇ ಸುಳ್ಳು ಸುದ್ದಿ ಮೂಲಗಳನ್ನು ಪತ್ತೆ ಮಾಡಿ ಅವುಗಳನ್ನು ಬೇರು ಸಮೇತ ಕತ್ತರಿಸುವ ಬಗ್ಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕಿದೆ ಎಂದು ಸೂಚಿಸಿದ್ದರು