ಸ್ಪರ್ಧಾತ್ಮಕ ವಾತಾವರಣದಲ್ಲಿ ಯಶಸ್ವಿಯಾಗುವಂತಹ ಶಿಕ್ಷಣ ನೀಡುವುದು ರಾಷ್ಟ್ರೀಯ ಶಿಕ್ಷಣ ನೀತಿಯ ಮುಖ್ಯ ಉದ್ದೇಶ

ವಿಜಯಪುರ:ಮೇ.24: ಜಾಗತಿಕ ಮಟ್ಟದ ಸ್ಪರ್ಧಾತ್ಮಕ ವಾತಾವರಣದಲ್ಲಿ ಯಶಸ್ವಿಯಾಗುವಂತಹ ಶಿಕ್ಷಣ ನೀಡುವುದು ರಾಷ್ಟ್ರೀಯ ಶಿಕ್ಷಣ ನೀತಿ-2020ರ ಮುಖ್ಯ ಉದ್ದೇಶವಾಗಿದೆ ಎಂದು ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಪರಿಷತ್ತಿನ ಉಪಾಧ್ಯಕ್ಷ ಪ್ರೊ.ವೈ.ಎಸ್.ಸಿದ್ದೇಗೌಡ ಹೇಳಿದರು.
ಇಲ್ಲಿಯ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಐಕ್ಯುಎಸಿ ಘಟಕದ ಆಶ್ರಯದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಕೃತಕ ಬುದ್ದಿಮತ್ತೆ ಬೋಧನಾ ಕೌಶಲಗಳು ಕುರಿತ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದ ಅವರು, ವಿದ್ಯಾರ್ಥಿಗಳು ವಿವಿಧ ಕೌಶಲಯುತ ಶಿಕ್ಷಣ, ಜ್ಞಾನ ಸಂಪಾದಿಸುವ ಮೂಲಕ ಜೀವನದ ಯಾವುದೇ ಕ್ಷೇತ್ರದಲ್ಲಿ ಯಶಸ್ಸು ಸಾಧಿಸುವಂತಹ ಸಾಮಥ್ರ್ಯ ಗಳಿಸುವಂತೆ ಮಾಡಬೇಕಿದೆ ಎಂದರು.
ದೇಶದ ಜನಸಂಖ್ಯೆಯಲ್ಲಿ ಇವತ್ತು ಶೇಕಡ 66ರಷ್ಟು ಯುವ ಜನಾಂಗವಿದೆ. ಇಷ್ಟು ಬೃಹತ್ ಪ್ರಮಾಣದ ಮಾನವ ಸಂಪನ್ಮೂಲವನ್ನು ವಿವಿಧ ಕೌಶಲಯುಕ್ತ ಮತ್ತು ಜ್ಞಾನಾಧಾರಿತ ಶಿಕ್ಷಣದ ಮೂಲಕ ಸರ್ವಾಂಗೀಣ ಅಭಿವೃದ್ಧಿ ಮಾಡಿದ್ದೇ ಆದಲ್ಲಿ ಜಗತ್ತಿನಲ್ಲಿ ಭಾರತದ ಸ್ಥಾನಮಾನ ಅತ್ಯಂತ ಎತ್ತರದ ಮಟ್ಟಕ್ಕೆ ಏರುವುದರಲ್ಲಿ ಅನುಮಾನವೇ ಇಲ್ಲ ಎಂದು ಪ್ರೊ.ಸಿದ್ದೇಗೌಡ ಪ್ರತಿಪಾದಿಸಿದರು.
ರಾಜ್ಯದಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ ಅನುಷ್ಟಾನಗೊಳಿಸಿದ ನಂತರದ ದಿನಗಳಲ್ಲಿ ಶಿಕ್ಷಕರ ಜವಾಬ್ದಾರಿ ಮತ್ತು ಪಾತ್ರಗಳಲ್ಲಿ ಬಹಳಷ್ಟು ಬದಲಾವಣೆಗಳಾಗಿವೆ. ಈ ಬದಲಾವಣೆಗಳನ್ನು ಪ್ರತಿಯೊಬ್ಬ ಅಧ್ಯಾಪಕರು ಅಳವಡಿಸಿಕೊಳ್ಳುವಂತಾಗಲು ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಪರಿಷತ್ ಹಲವಾರು ಕಾರ್ಯಾಗಾರಗಳನ್ನು ಹಮ್ಮಿಕೊಳ್ಳುತ್ತ ಬಂದಿದೆ. ಈ ಕಾರ್ಯಾಗಾರದ ಸಂಪೂರ್ಣ ಪ್ರಯೋಜನಗಳನ್ನು ವಿದ್ಯಾರ್ಥಿಗಳಿಗೆ ಪರಿಣಾಮಕಾರಿಯಾಗಿ ಕಲಿಸುವ ಮೂಲಕ ಸಾಕಾರಗೊಳಿಸಬೇಕು ಎಂದು ಅವರು ಸಲಹೆ ನೀಡಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕುಲಪತಿ ಪ್ರೊ.ಬಿ.ಕೆ.ತುಳಸಿಮಾಲ ಅವರು ಮಾತನಾಡಿ, ಪ್ರಸ್ತುತ ಕಾಲಘಟಕ್ಕೆ ಬೇಕಾದ ಕೌಶಲಗಳನ್ನು ವಿದ್ಯಾರ್ಥಿಗಳಲ್ಲಿ ಬೆಳೆಸುವ ಮೂಲಕ ಅವರನ್ನು ಜ್ಞಾನವಂತರನ್ನಾಗಿ ಮಾಡುವ ಮತ್ತು ಶೈಕ್ಷಣಿಕವಾಗಿ ಸಬಲೀಕರಣಗೊಳಿಸುವ ಗುರಿಯನ್ನು Áಷ್ಟ್ರೀಯ ಶಿಕ್ಷಣ ನೀತಿ ಹೊಂದಿದೆ ಎಂದರು.
ಇವತ್ತು ನಾವು ನಮಗೆ ಗೊತ್ತಿದ್ದೋ ಗೊತ್ತಿಲ್ಲದೆಯೋ ಕೃತಕ ಬುದ್ದಿಮತ್ತೆಯನ್ನು ಎಲ್ಲಾ ಕ್ಷೇತ್ರಗಳಲ್ಲಿಯೂ ವ್ಯಾಪಕವಾಗಿ ಬಳಕೆ ಮಾಡಿಕೊಳ್ಳುತ್ತಿದ್ದೇವೆ. ಇದರ ಮುಖ್ಯ ಉದ್ದೇಶ ದಕ್ಷ ಮತ್ತು ಪಾರದರ್ಶಕ ವ್ಯವಸ್ಥೆಯನ್ನು ರೂಪಿಸುವುದಾಗಿದೆ. ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು ಕೃತಕ ಬುದ್ದಿಮತ್ತೆಯ ಎಲ್ಲಾ ಮಜಲುಗಳನ್ನು ಈ ಹಂತದಲ್ಲಿಯೇ ಅರ್ಥೈಸಿಕೊಳ್ಳಬೇಕಾದ ಅಗತ್ಯವಿದೆ ಎಂದು ಪ್ರೊ,ತುಳಸಿಮಾಲ ಪ್ರತಿಪಾದಿಸಿದರು.
ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಪರಿಷತ್ತಿನ ವಿಶೇಷಾಧಿಕಾರಿ ಪ್ರೊ.ಎಂ.ಜಯಪ್ಪ, ಮೌಲ್ಯಮಾಪನ ಕುಲಸಚಿವ ಪ್ರೊ.ಎಚ್.ಎಂ.ಚಂದ್ರಶೇಖರ ಮತ್ತು ನಾಸ್ಕಾಂನ ದಿನೇಶ ಮಾಣಿಗ್ರಾಹಿ, ಶರ್ಮಾ ಮತ್ತಿತರರು ಉಪಸ್ಥಿತರಿದ್ದರು.
ಸಂಗೀತ ಮತ್ತು ಪ್ರದರ್ಶಕ ಕಲೆಗಳ ವಿಭಾಗದ ವಿದ್ಯಾರ್ಥಿನಿಯರಿಂದ ಪ್ರಾರ್ಥನೆ. ಕುಲಸಚಿವ ಪ್ರೊ.ಬಿ.ಎಸ್.ನಾವಿ ಸ್ವಾಗತಿಸಿದರು. ಐಕ್ಯುಎಸಿ ನಿರ್ದೇಶಕ ಪ್ರೊ.ಪಿ.ಜಿ.ತಡಸದ ಪ್ರಾಸ್ತಾವಿಕವಾಗಿ ಮಾತನಾಡಿದರು. ಐಕ್ಯುಎಸಿ ಉಪನಿರ್ದೇಶಕಿ ಡಾ.ರೇಣುಕಾ ಮೇಟಿ ಅವರು ಅತಿಥಿಗಳನ್ನು ಪರಿಚಯಿಸಿ ಕಾರ್ಯಕ್ರಮ ನಿರೂಪಿಸಿದರು. ಎಫ್‍ಡಿಪಿ ಸಂಯೋಜಕ ಪ್ರೊ.ಓಂಕಾರ ಕಾಕಡೆ ವಂದಿಸಿದರು.