ಬೆಂಗಳೂರು,ಸೆ.೨೮-ಕರ್ನಾಟಕದ ೧೨ಕ್ಕೂ ಅಧಿಕ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದ್ದು ಈ ನಿಟ್ಟಿನಲ್ಲಿ ಹವಮಾನ ಇಲಾಖೆ ಮುನ್ನೆಚ್ಚರಿಕಾ ಕ್ರಮವಾಗಿ ಹಳದಿ ಅಲರ್ಟ್ ಘೋಷಣೆ ಮಾಡಿದೆ.
ರಾಜ್ಯದ ಕರಾವಳಿ ಜಿಲ್ಲೆಗಳಾದ ಉಡುಪಿ, ಉತ್ತರ ಕನ್ನಡ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಸೆಪ್ಟೆಂಬರ್ ೨೯ರಂದು ಭಾರೀ ಮಳೆಯಾಗುವ ಸಾಧ್ಯತೆಇದೆ. ಹೀಗಾಗಿ ಹಳದಿ ಅಲರ್ಟ್ ಘೋಷಣೆ ಮಾಡಲಾಗಿದೆ.
ಹವಾಮಾನ ಇಲಾಖೆಯು ಉತ್ತರ ಒಳನಾಡಿನ ಮತ್ತು ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಹಳದಿ ಎಚ್ಚರಿಕೆಯನ್ನು ಘೋಷಿಸಿದೆ. ಸೆಪ್ಟೆಂಬರ್ ೨೯ ಮತ್ತು ೩೦ ರಂದು ರಾಯಚೂರು, ಗದಗ, ಕೊಪ್ಪಳ, ಬಾಗಲಕೋಟೆ, ಗದಗ, ಬೆಳಗಾವಿ ಜಿಲ್ಲೆಗಳಲ್ಲಿ ಹಳದಿ ಅಲರ್ಟ್ ಘೋಷಿಸಲಾಗಿದೆ.
ಸೆಪ್ಟೆಂಬರ್ ೩೦ ರಂದು ಬಳ್ಳಾರಿ, ಚಿತ್ರದುರ್ಗ ಮತ್ತು ದಾವಣಗೆರೆ ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗುವ ಸಾಧ್ಯತೆಯಿದೆ, ಈ ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗಲಿರುವ ಕಾರಣ ಹವಾಮಾನ ಇಲಾಖೆ ಹಳದಿ ಅಲರ್ಟ್ ಘೋಷಿಸಿದೆ.
ಕೋಲಾರದಲ್ಲಿ ಧಾರಾಕಾರ ಮಳೆಯಾಗಿದೆ. ಜಿಲ್ಲೆಯಲ್ಲಿ ಮಳೆಯಿಲ್ಲದೆ ರೈತರು ತೀವ್ರ ಆಘಾತಗೊಂಡಿದ್ದು,ನಿನ್ನೆ ರಾತ್ರಿ ಸುರಿದ ಭಾರೀ ಮಳೆ ಅಬ್ಬರಕ್ಕೆ ಜನಜೀವನ ಏರುಪೇರಾಗಿದೆ.
ಬೆಳಗಾವಿ, ಧಾರವಾಡ, ಗದಗ, ಕೊಪ್ಪಳ, ಬಳ್ಳಾರಿ, ವಿಜಯನಗರದಲ್ಲೂ ಹೆಚ್ಚು ಮಳೆಯಾಗಲಿದೆ. ಇಲ್ಲಿ ಅಂದಾಜು ೯೦ ಮಿ.ಮೀ ನಿಂದ ೧೫೦ ಮಿ.ಮೀ ಮಳೆಯಾಗುವ ಸಾಧ್ಯತೆ ಇದೆ. ಕಲಬುರಗಿ, ಬೀದರ್ ನಲ್ಲಿ ೯೦ ಮಿ.ಮೀ ನಿಂದ ೨೫೦ ಮಿ.ಮೀ ಮಳೆಯಾಗುವ ಸಾಧ್ಯತೆ ಇದೆ.
ಮಲೆನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಹಾಸನದ ಪಶ್ಚಿಮ ಭಾಗ, ಕೊಡಗಿನಲ್ಲಿ ಮಳೆಯಾಗಲಿದೆ. ಈ ಪ್ರದೇಶಗಳಲ್ಲಿ ಅಂದಾಜು ೧೭೫ ಮಿ.ಮೀ ನಿಂದ ೨೫೦ ಮಿ.ಮೀ ಮಳೆಯಾಗುವ ನಿರೀಕ್ಷೆಯಿದೆ. ಜೂನ್ ೧ರಿಂದ ಇಂದಿನವರೆಗೆ ರಾಜ್ಯದಲ್ಲಿ ಶೇ.೧೯ರಷ್ಟು ಮಳೆ ಅಭಾವವಿದೆ. ಉತ್ತರ ಒಳನಾಡಿನಲ್ಲಿ ಶೇ.೬, ದಕ್ಷಿಣ ಒಳನಾಡಿನಲ್ಲಿ ಶೇ.೨೭. ಮಳೆಯ ಅಭಾವದಿಂದ ಉಂಟಾಗಿದೆ.